ದಾವಣಗೆರೆ :ತಾಲೂಕಿನ ಆನಗೋಡು ಗ್ರಾಮದ ರೈತ ಸಂಪರ್ಕ ಕೇಂದ್ರಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ದಿಢೀರ್ ಭೇಟಿ ನೀಡಿ ಬಿತ್ತನೆ ಬೀಜ, ರಸಗೊಬ್ಬರ ಪರಿಶೀಲನೆ ನಡೆಸಿದರು.

ಕೃತಕ ಅಭಾವ ಸೃಷ್ಟಿಸದಂತೆ ಬಿತ್ತನೆ ಬೀಜ, ಗೊಬ್ಬರ ವಿತರಣೆಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು
ದಾವಣಗೆರೆ: ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಭೂಮಿ ಹದ ಮಾಡಿಕೊಂಡು ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ರೈತರಿಗೆ ಕೃತಕ ಅಭಾವ ಸೃಷ್ಟಿ ಮಾಡದಂತೆ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕವಾಗಿ ವಿತರಣೆ ಮಾಡಬೇಕೆಂದು ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಎಚ್ಚರಿಕೆ ನೀಡಿದರು.
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ತಾಲೂಕಿನ ಆನಗೋಡು ಗ್ರಾಮದ ರೈತ ಸಂಪರ್ಕ ಕೇಂದ್ರಕ್ಕೆ ಸೋಮವಾರ ದಿಢೀರ್ ಭೇಟಿ ನೀಡಿ, ರೈತರಿಗೆ ವಿತರಣೆ ಮಾಡಲು ದಾಸ್ತಾನು ಮಾಡಿರುವ ಬಿತ್ತನೆ ಬೀಜ, ರಸಗೊಬ್ಬರ ಪರಿಶೀಲನೆ ನಡೆಸಿದರು.
‘ಎಂ.ಕೆ., ಡಿಕೆಸಿ, ಗಂಗಾ ಕಾವೇರಿ’ ರೈತರ ಬೇಡಿಕೆ ಇರುವ ಮೆಕ್ಕೆಜೋಳ ಬಿತ್ತನೆ ಬೀಜಗಳು. ಆದರೆ ಇಲ್ಲಿ ಬೇರೆ ಕಂಪನಿಗಳ ಮೆಕ್ಕೆಜೋಳದ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿದ್ದೀರಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ಕೂಡಲೇ ಜಂಟಿ ಕೃಷಿ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ, ರೈತರ ಬೇಡಿಕೆಗೆ ಅನುಗುಣವಾಗಿ ಮೆಕ್ಕೆಜೋಳ ಬಿತ್ತನೆ ಬೀಜ, ರಸಗೊಬ್ಬರ ತರಿಸಿ ವಿತರಣೆ ಮಾಡಬೇಕು. ರೈತರಿಗೆ ಬೇಡವಾದ ಬಿತ್ತನೆ ಬೀಜ ಇಲ್ಲಿ ದಾಸ್ತಾನು ಮಾಡಲಾಗಿದೆ. ಕೂಡಲೇ ಈ ಬೀಜಗಳನ್ನು ವಾಪಾಸ್ ಕಳುಹಿಸಿ, ರೈತರಿಗೆ ಬೇಕಾದ ಬಿತ್ತನೆ ಬೀಜ ವಿತರಿಸಬೇಕೆಂದು ತಾಕೀತು ಮಾಡಿದರು.
ಹಿಂದಿನ ವರ್ಷದಲ್ಲಿ ಸಂಭವಿಸಿದ ಭೀಕರ ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದಾರೆ. ಈಗ ಮುಂಗಾರು ಪೂರ್ವದಲ್ಲಿ ಉತ್ತಮ ಮಳೆ ಬರುತ್ತಿದೆ. ಈ ಸಂದರ್ಭದಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಬೇಕು. ಜೊತೆಗೆ ಬಿತ್ತನೆಗೆ ಬೇಕಾದ ಕೃಷಿ ಉಪಕರಣಗಳನ್ನು ಸಮರ್ಪಕವಾಗಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿತ್ತನೆ ಬೀಜಗಳನ್ನು ಪ್ರಯೋಗಿಕವಾಗಿ ಬೀಜ ಹಾಕಿ ಪರೀಕ್ಷೆಗೆ ಒಳಪಡಿಸಬೇಕು. ಅದು ಉತ್ಕೃಷ್ಟವಾಗಿ ಮೊಳಕೆಯೊಡೆದರೆ ಆ ಬೀಜಗಳನ್ನು ರೈತರಿಗೆ ವಿತರಿಸಬೇಕು. ಈಗ ರೈತರಿಗೆ ಬೇಕಾದ ಬೀಜ ತಂದು ಪರೀಕ್ಷೆಗೊಳಪಡಿಸಿ ವಿತರಿಸಬೇಕೆಂದರೂ ಕನಿಷ್ಠ ಒಂದೂವರೆ ವಾರ ಸಮಯ ಬೇಕು. ಈ ಕೆಲಸ ಪೂರ್ವದಲ್ಲಿಯೇ ಮಾಡಿದರೆ ಈ ಸಮಸ್ಯೆ ಆಗುತ್ತಿರಲಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
–ಬಾಕ್ಸ್—
ಎಒ ಗೈರು; ತರಾಟೆ
ಆನಗೋಡು ರೈತ ಸಂಪರ್ಕ ಕೇಂದ್ರದ ಎಒ ಶ್ರೀನಿವಾಸ್ ರಜೆಯ ಮೇಲೆ ತೆರಳಿದ್ದರಿಂದ ಶಾಸಕ ಕೆ.ಎಸ್.ಬಸವಂತಪ್ಪ ತರಾಟೆಗೆ ತೆಗೆದುಕೊಂಡರು. ಬೇರೆ ದಿನಗಳಲ್ಲಿ ರಜೆ ತೆಗೆದುಕೊಂಡರೆ ಯಾರು ಕೇಳುವುದಿಲ್ಲ. ರೈತರು ಬಿತ್ತನೆ ಮಾಡುವ ಸಂದರ್ಭದಲ್ಲಿ ಕೇಂದ್ರ ಸ್ಥಳದಲ್ಲಿದ್ದು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಬೇಕು. ಈ ಬಾರಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿದ್ದು ರೈತರ ನೆರವಿಗೆ ಧಾವಿಸಬೇಕೆಂದು ಸೂಚನೆ ನೀಡಿದರು.

LEAVE A REPLY

Please enter your comment!
Please enter your name here