ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ಕುಂದು ಕೊರತೆ ನಿವಾರಣೆಗಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಸಹಾಯವಾಣಿ ಪ್ರಾರಂಭಿಸಲಾಗಿದೆ.
ಬಡತನದಲ್ಲೂ ವಿದ್ಯಾಭ್ಯಾಸ ಮುಂದುವರಿಸಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ವಿದ್ಯಾರ್ಥಿಗಳು
ಹಾಸ್ಟಲ್ ಗೆ ಸೇರುತ್ತಾರೆ. ಸರ್ಕಾರ ಕೂಡ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಮೂಲಭೂತ ವ್ಯವಸ್ಥೆಗಳನ್ನು ಒದಗಿಸುತ್ತದೆ. ಆದರೂ ಕೂಡ ಕೆಲವು ಕಡೆ ವಿದ್ಯಾರ್ಥಿಗಳಿಗೆ ವ್ಯವಸ್ಥೆಗಳು ಸರಿಯಾಗಿ ತಲುಪುತ್ತಿಲ್ಲ ಅವುಗಳನ್ನು ಸುಧಾರಿಸುವ ನಿಟ್ಟಿನಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಸಹಾಯವಾಣಿ ಸಂಖ್ಯೆ ಅನಾವರಣಗೊಳಿಸಲು ತೀರ್ಮಾನಿಸಿತು.
ಇಂದು ಡಾ; ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು “ಸಹಾಯವಾಣಿ ಸಂಖ್ಯೆ 9480872008 ಯನ್ನು* ಅನಾವರಣಗೊಳಿಸಿದರು.
ಹಾಸ್ಟಲ್ ನಲ್ಲಿ ಊಟ, ಕೊಠಡಿ, ಕುಡಿಯುವ ನೀರು ಸ್ವಚ್ಛತೆ ಕುರಿತಂತೆ ವಿದ್ಯಾರ್ಥಿಗಳಿಗೆ ತೊಂದರೆ ಇದ್ದಲ್ಲಿ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ ಅವರು ತಿಳಿಸಿದ್ದಾರೆ